ಕಾಪು: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಚ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಗಳಪೇಟೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಪ್ರತೀಶ್ ಪ್ರಸಾದ್(21) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸವಾರ ನಿಹಾಲ್ ವಿಲ್ಸನ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಪುವಿನಿಂದ ಪಡುಬಿದ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ರಿತೇಶ್ ಶೆಟ್ಟಿ ಅವರು ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಅಪಘಾತದಲ್ಲಿ ಸ್ಕೂಟಿ ಸಮೇತ ಕೆಳಕ್ಕುರುಳಿ ಗಂಭೀರ ಗಾಯಗೊಂಡ ಸವಾರರಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪ್ರತೀಶ್ ಅವರು ಅದಾಗಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.